ಬೆಂಗಳೂರು: ಕಾಂಗ್ರೆಸ್ನಲ್ಲಿ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಲಿ ಎಂದು ಹೇಳುವ ಮೂಲಕ ಸಚಿವ ಸತೀಶ ಜಾರಕಿಹೊಳಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ನ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಬೆಂಗಳೂರಿಗೆ ವಾಪಸ್ಸಾದ ನಂತರ ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಇವರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಂದರು.
ಸ್ಥಾನದ ಬಗ್ಗೆ ಮೀಡಿಯಾದಲ್ಲೋ, ಅಂಗಡಿಯಲ್ಲೋ ಕೇಳೋಕ್ಕಾಗತ್ತಾ? ಯಾರಿಗಾದರೂ ಸ್ಥಾನ ಬೇಕಾಗಿದ್ದರೆ ರಾಹುಲ್ ಗಾಂಧಿ, ಖರ್ಗೆ ಜೊತೆ ಮಾತನಾಡಲಿ. ಅವರವರ ಶ್ರಮಕ್ಕೆ ತಕ್ಕ ಸ್ಥಾನವನ್ನು ಕಾಂಗ್ರೆಸ್ನ ಹೈಕಮಾಂಡ್ ನಾಯಕರು ಕೊಡುತ್ತಾರೆ ಎಂದು ಹೇಳಿದರು.
ಪಕ್ಷವನ್ನು ನಾನು ಅಧಿಕಾರಕ್ಕೆ ತಂದಿದ್ದಲ್ಲ, ಕಾರ್ಯಕರ್ತರು ತಂದಿದ್ದು. ಎಲ್ಲಾ ನಾಯಕರಿಗೂ ಮನವಿ ಮಾಡುತ್ತೇನೆ, ಕಾಂಗ್ರೆಸ್ ಎಂಬುದು ಕಾರ್ಯಕರ್ತರ ಪಕ್ಷ ಎಂದು ಡಿಕೆ ಶಿವಕುಮಾರ್ ತಿಳಿಸಿದರು.