ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಜಾಗತಿಕ ತಾಪಮಾನ ಏರಿಕೆ, ತೇವಾಂಶದ ಕೊರತೆ, ಸ್ಪಷ್ಟ ಆಕಾಶದ ಪರಿಣಾಮದಿಂದಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನ 4ರಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಸ್ತುತ ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ 35 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ತಾಪಮಾನ ದಾಖಲಾಗುತ್ತಿದೆ.
ಹವಾಮಾನ ತಜ್ಞರ ಪ್ರಕಾರ, ಮಾರ್ಚ್ ಆರಂಭದಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಲಿದ್ದು, ವಿಶೇಷವಾಗಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ತೀವ್ರ ಬಿಸಿಲು ಇರುವ ಸಾಧ್ಯತೆಯಿದೆ. ಇದರಿಂದ ಜನಸಾಮಾನ್ಯರು, ವೃದ್ಧರು, ಮಕ್ಕಳು ಮತ್ತು ರೋಗಿಗಳು ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಲಾಗಿದೆ.
ಹವಾಮಾನ ಇಲಾಖೆಯ ಈ ಮುನ್ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ಬೇಸಿಗೆ ಸಿದ್ಧತೆಗಳನ್ನು ತ್ವರಗತಿಯಲ್ಲಿ ಮಾಡುವಂತೆ ಸೂಚಿಸಲಾಗಿದೆ. ನೀರು ಸಂಗ್ರಹ, ವಿದ್ಯುತ್ ಪೂರೈಕೆ ಮತ್ತು ಆರೋಗ್ಯ ಸೇವೆಗಳಲ್ಲಿ ವಿಶೇಷ ಗಮನ ಹರಿಸುವಂತೆ ಸೂಚನೆ ನೀಡಲಾಗಿದೆ.
ಸಾರ್ವಜನಿಕರಿಗೆ ಸಲಹೆಗಳು
• ಮಧ್ಯಾಹ್ನದ ಸಮಯದಲ್ಲಿ ಹೆಚ್ಚು ಹೊರಗೆ ಓಡಾಡುವುದನ್ನು ತಪ್ಪಿಸಿ
• ಸಾಕಷ್ಟು ನೀರು ಕುಡಿಯಿರಿ
• ಬಿಸಿಲಿನಿಂದ ರಕ್ಷಣೆಗೆ ಟೋಪಿ, ಕನ್ನಡಕ, ಛತ್ರಿ ಬಳಸಿ
• ವೃದ್ಧರು ಮತ್ತು ಮಕ್ಕಳ ಆರೋಗ್ಯದತ್ತ ವಿಶೇಷ ಗಮನ





