ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ಫಾಸ್ಟ್ಗಾಗಿ ಮನೆಗೆ ಆಹ್ವಾನಿಸಿದ್ದರು. ಹಾಗಾಗಿ ಒಪ್ಪಿ ಬಂದಿದ್ದೆ. ಇಬ್ಬರೂ ಸೇರಿ ಉಪಹಾರ ಸೇವಿಸಿದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಡಿಕೆಶಿ ಮೊನ್ನೆ ನಮ್ಮ ಮನೆಗೆ ಬ್ರೇಕ್ಫಾಸ್ಟ್ಗೆ ಬಂದಾಗ ನನ್ನನ್ನೂ ಮಂಗಳವಾರ ಬ್ರೇಕ್ಫಾಸ್ಟ್ಗೆ ಬನ್ನಿ ಎಂದು ಆಹ್ವಾನಿಸಿದ್ದರು. ಹಾಗಾಗಿ ಬಂದಿದ್ದೆ. ಇಬ್ಬರೂ ಸೇರಿ ಬ್ರೇಕ್ಫಾಸ್ಟ್ ಮಾಡಿದ್ದು, ಪಕ್ಷದ ವಿಚಾರ, ಅಧಿವೇಶನದ ವಿಚಾರ ಸೇರಿದಂತೆ ಎಲ್ಲವನ್ನೂ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.
ಡಿಸೆಂಬರ್.8ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸಿದ್ದೇವೆ. ರಾಜ್ಯದ ಅಭಿವೃದ್ಧಿ ಕೆಲಸ, ರೈತರ ಸಮಸ್ಯೆ, ಬೆಳೆ ಪರಿಹಾರ, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ಬೆಳೆಗೆ ಸಂಬಂಧಿಸಿದಂತೆ ರೈತರ ಬೇಡಿಕೆ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ವಿಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪ ಮಾಡಿದರೂ ಎದುರಿಸುತ್ತೇವೆ. ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇದೆ ಎಂದು ಹೇಳಿದರು.
ಇನ್ನು ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ನಾಯಕರು ಏನು ಹೇಳುತ್ತಾರೆ ಅದೃಂತೆ ನಡೆದುಕೊಳ್ಳುತ್ತೇವೆ. ಅವರ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.





