Mysore
20
broken clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ಮಳೆ ಕೊರತೆಯಿಂದ ತೊಗರಿ ಬೆಳೆ ಹಾನಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಿಷ್ಟು.!

ಬೆಂಗಳೂರು: ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿಯನ್ನು ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ ರೈತರಿಗೆ 91.93 ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿಂದು ಮಾತನಾಡಿದ ಅವರು, ರಾಜ್ಯದ ಕಲ್ಬುರ್ಗಿ, ವಿಜಯಪುರ, ಬೆಳಗಾವಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ತೊಗರಿ ಮುಖ್ಯ ಬೆಳೆಯಾಗಿದ್ದು, ಸೆಪ್ಟೆಂಬರ್ ನಿಂದ ನವೆಂಬರ್ ವರೆಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿ ತೇವಾಂಶ ಕುಸಿತದಿಂದ ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಇದಕ್ಕೆ ಕಳಪೆ ಬಿತ್ತನೆ ಬೀಜ ಕಾರಣವಲ್ಲ ಎಂಬುದನ್ನು ಪ್ರಯೋಗಾಲಯದ ಮೂಲಕ ಗುಣಮಟ್ಟ ಖಾತರಿ ಮೂಲಕ ಖಚಿತಪಡಿಸಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯಾದ್ಯಂತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 4.09 ಲಕ್ಷ ರೈತರು ತೊಗರಿ ಬೆಳೆಗೆ ವಿಮೆ ಮಾಡಿಸಿದ್ದಾರೆ. ಇದರ ಪೈಕಿ, ಕಲಬುರಗಿ ಜಿಲ್ಲೆಯಲ್ಲಿ 1.70 ಲಕ್ಷ ರೈತರು, ವಿಜಯಪುರ ಜಿಲ್ಲೆಯಲ್ಲಿ 1.08 ಲಕ್ಷ ರೈತರು, ಬೆಳಗಾವಿ ಜಿಲ್ಲೆಯಲ್ಲಿ 1213 ರೈತರು ಬೀದರ್ ಜಿಲ್ಲೆಯಲ್ಲಿ 82384 ರೈತರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 6390 ರೈತರು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿದ್ದಾರೆ. ಸ್ಥಳೀಯ ವಿಕೋಪದಡಿ ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ವಿವರಿಸಿದರು.

ಕಲಬುರಗಿ ಜಿಲ್ಲೆಯ 1.69ಲಕ್ಷ ರೈತರಿಗೆ ರೂ.70.47 ಕೋಟಿ ವಿಮಾ ಪರಿಹಾರವನ್ನು ಇತ್ಯರ್ಥಪಡಿಸಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ಕೊಯ್ಲೋತ್ತರ ಬೆಳೆ ನಷ್ಟಕ್ಕಾಗಿ 2.74 ಕೋಟಿ ವಿಮೆ ಪರಿಹಾರ ಇತ್ಯರ್ಥಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಪೈಕಿ, ಕಲಬುರಗಿ ಜಿಲ್ಲೆಯ 2.54 ಕೋಟಿ ಒಳಗೊಂಡಿರುತ್ತದೆ ಎಂದು ಉತ್ತರ ನೀಡಿದರು.

Tags:
error: Content is protected !!