ರಾಜ್ಯ

ರಾಜ್ಯದಲ್ಲಿ ಇಂದಿನಿಂದ ಟ್ರೆಕ್ಕಿಂಗ್‌ಗೆ ಮತ್ತೆ ಅವಕಾಶ: ಆನ್‌ಲೈನ್‌ನಲ್ಲಿ ಬುಕ್ಕಿಂಗ್‌ ಕಡ್ಡಾಯ

ಬೆಂಗಳೂರು: ಕುಮಾರ ಪರ್ವತ ಸೇರಿದಂತೆ ರಾಜ್ಯದ ಕೆಲವು ಅರಣ್ಯ ಪ್ರದೇಶಗಳಲ್ಲಿ ಇಂದಿನಿಂದ(ಸೆ.3) ಚಾರಣಕ್ಕೆ ಅನುಮತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು ಆನ್ ಲೈನ್ ನಲ್ಲಿ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸುವ https://aranyavihaara.karnataka.gov.in ವೆಬ್ ಸೈಟ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದೆ. ಆದರೆ, ಇದರಿಂದ ಪರಿಸರಕ್ಕೆ ಹಾನಿ ಆಗಬಾರದು ಎಂಬುದು ಸರ್ಕಾರದ ಕಾಳಜಿಯಾಗಿದ್ದು, ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸುವುದಾಗಿ ಹೇಳಿದ್ದಾರೆ.

ಕಳೆದ ಜನವರಿ 26, 27ರಂದು ಕುಮಾರಪರ್ವತಕ್ಕೆ 5-6 ಸಾವಿರ ಪ್ರವಾಸಿಗರು ಒಂದೇ ದಿನ ಆಗಮಿಸಿದ ಹಿನ್ನೆಲೆಯಲ್ಲಿ ಗೊಂದಲ ಆಗಿತ್ತು. ಇಂತಹ ಗೊಂದಲ ನಿವಾರಿಸಲು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗಿದೆ ಎಂದರು.

ಈ ಅಂತರ್ಜಾಲ ತಾಣದಲ್ಲಿ ರಾಜ್ಯ ಎಲ್ಲ ಚಾರಣ ಪಥಗಳ ಟಿಕೆಟ್ ಅನ್ನೂ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಒಂದು ಚಾರಣ ಪಥಕ್ಕೆ ನಿರ್ದಿಷ್ಟ ದಿನ ಟಿಕೆಟ್ ಸಿಗದವರು ಬೇರೆ ಚಾರಣಪಥವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಪ್ರಸ್ತುತ 5 ತಾಣಗಳಿಗೆ ಅಂದರೆ ಕುಮಾರ ಪರ್ವತದಿಂದ ಸುಬ್ರಹ್ಮಣ್ಯ, ಬೀದಹಳ್ಳಿಯಿಂದ – ಕುಮಾರ ಪರ್ವತ, ಬೀದಹಳ್ಳಿ -ಕುಮಾರ ಪರ್ವತ – ಸುಬ್ರಹ್ಮಣ್ಯ, ಚಾಮರಾಜನಗರ – ನಾಗಮಲೈ, ತಲಕಾವೇರಿಯಿಂದ-ನಿಶಾನೆಮೊಟ್ಟೆ ಚಾರಣ ತಾಣಗಳಿಗೆ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶವಿದೆ. ಈ ಮಾಸಾಂತ್ಯದೊಳಗೆ 40 ಚಾರಣ ಪಥಗಳನ್ನು ಈ ಅಂತರ್ಜಾಲ ತಾಣದಲ್ಲಿ ಸೇರಿಸಲಾಗುವುದು. ಜೊತೆಗೆ ವನ್ಯಜೀವಿ ಸಫಾರಿ ಮತ್ತು ಬೋಟ್ ಸಫಾರಿಗೂ ಇದರಲ್ಲೇ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.

ಒಂದು ಫೋನ್ ನಂಬರ್ ನಲ್ಲಿ 10 ಟಿಕೆಟ್ ಮುಂಗಡ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗುವುದು, 7 ದಿನ ಮೊದಲು ರದ್ದು ಮಾಡಿದರೆ ಪೂರ್ಣ ಹಣ ಮರಳಿಸಲು ಅವಕಾಶ ಇರುತ್ತದೆ. ನಂತರದ ರದ್ದತಿಗೆ ಪೂರ್ಣ ಹಣ ಸಿಗುವುದಿಲ್ಲ, ಭಾಗಶಃ ಕಡಿತ ಮಾಡಲಾಗುವುದು ಎಂದರು.

ಅಂತರ್ಜಾಲ ತಾಣದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳ ಚಿತ್ರ, ಅವುಗಳ ವಿಶೇಷ ಕುರಿತಂತೆ ಸಂಕ್ಷಿಪ್ತ ಮಾಹಿತಿ ಒದಗಿಸಲಾಗಿದೆ. ಇದರಿಂದ ಚಾರಣಿಗರಿಗೆ ಮತ್ತು ಪ್ರವಾಸಿಗರಿಗೆ ಮಾಹಿತಿಯೂ ಲಭಿಸುತ್ತದೆ. ಟಿಕೆಟ್ ಅನ್ನು ಮುಂಗಡ ಕಾಯ್ದಿರಿಸಲು ಅವಕಾಶವೂ ಆಗುತ್ತದೆ ಎಂದರು.

ಮುಂಗಾರು ಮಳೆ ಸುರಿಯುವ ಸಮಯದಲ್ಲಿ ಚಾರಣ ಮಾಡುವುದು ಸೂಕ್ತವಲ್ಲ. ಅನುಭವ ಇಲ್ಲದ ಚಾರಣಿಗರು ಜಾರಿ ಬೀಳುವ ಅಪಾಯ ಇರುತ್ತದೆ. ಜೊತೆಗೆ ಕೀಟ, ಜೀವ ಜಂತುಗಳಿಗೂ ತೊಂದರೆ ಆಗುತ್ತದೆ. ಹೀಗಾಗಿ ಮಳೆಗಾಲದಲ್ಲಿ ಚಾರಣ ನಿರ್ಬಂಧಿಸುವುದು ಒಂದು ಕಾರಣವಾಗಿತ್ತು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಅಕ್ರಮಕ್ಕೆ ಕಡಿವಾಣ
ಈ ಚಾರಣ ಪಥಗಳ ಟಿಕೆಟ್ ಅನ್ನು ಚಾರಣ ಏರ್ಪಡಿಸುವ ಕೆಲವು ಖಾಸಗಿ ಸಂಸ್ಥೆಗಳು ಸಗಟು ಖರೀದಿ ಮಾಡುತ್ತವೆ. ಹೀಗಾಗಿ ನೈಜ ಚಾರಣಿಗರಿಗೆ ಟಿಕೆಟ್ ಲಭಿಸದಂತಾಗಿದೆ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಸರ್ಕಾರದ ಭಾವಚಿತ್ರ ಸಹಿತ ಗುರುತಿನ ಚೀಟಿ ಅಪ್ ಲೋಡ್ ಮಾಡಿ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಗೈಡ್ ಸೌಲಭ್ಯ
ಚಾರಣಕ್ಕೆ ಬರುವವರಿಗೆ ಆ ಗಿರಿ ಪ್ರದೇಶದಲ್ಲಿರುವ ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ಬಗ್ಗೆ ಮಾಹಿತಿ ನೀಡಲು ಮತ್ತು ಆ ಪ್ರದೇಶದ ಸಂಕ್ಷಿಪ್ತ ಇತಿಹಾಸ ತಿಳಿಸಲು ಹಾಗೂ ಚಾರಣದ ವೇಳೆ ಏನೆಲ್ಲಾ ಎಚ್ಚರಿಕೆ ವಹಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಪ್ರತಿ 10 – 20 ಚಾರಣಿಗರಿಗೆ ಒಬ್ಬರಂತೆ ಗೈಡ್ ಗಳನ್ನೂ ನಿಯೋಜಿಸಲಾಗುವುದು ಎಂದು ತಿಳಿಸಿದರು.

ಅರಣ್ಯ ಇಲಾಖೆಯ ಭಾಗವಾಗಿರುವ ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದ ಚಿಕ್ಕಬಳ್ಳಾಪುರದ ಸ್ಕಂದಗಿರಿ ಚಾರಣಪಥದಲ್ಲಿ ಆನ್ ಲೈನ್ ನಲ್ಲಿ ಟಿಕೆಟ್ ಗಳನ್ನು ಬ್ಲಾಕ್ ಮಾಡಲು ಖಾಸಗಿ ಪ್ರವಾಸೋದ್ಯಮ ಸಂಸ್ಥೆಗಳೊಂದಿಗೆ ಕೆಲವು ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ತನಿಖೆಗೆ ಆದೇಶ ನೀಡಲಾಗಿದೆ, ಕೆಲವು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ನಕಲಿ ಟಿಕೆಟ್ ಬಳಸಿ ಕಲವರು ಚಾರಣಕ್ಕೆ ಹೋಗುತ್ತಿದ್ದಾರೆ. ಕೆಲವು ಚಾರಣ ಪಥದಲ್ಲಿ ಸಿಬ್ಬಂದಿಯೇ ನಕಲಿ ಟಿಕೆಟ್ ಮಾಡಿಸಿ ಚಾರಣಿಗರಿಗೆ ಒಳ ಹೋಗಲು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪವೂ ಇದ್ದು, ಇದಕ್ಕಾಗಿ ಕೆ.ಎಸ್.ಆರ್.ಟಿ.ಸಿ.ಯಲ್ಲಿ ಇರುವಂತೆ ಸಂಚಾರಿ ದಳ ರಚಿಸಲಾಗುವುದು. ಈ ಸಂಚಾರಿ ದಳ ಅನಿರೀಕ್ಷಿತವಾಗಿ ಚಾರಣ ಪಥಗಳಿಗೆ ತೆರಳಿ ಪರಿಶೀಲನೆ ನಡೆಸಲಿದೆ. ನಕಲಿ ಟಿಕೆಟ್ ಕಂಡು ಬಂದರೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಪ್ಲಾಸ್ಟಿಕ್ ನಿಷೇಧ – 2 ಹಂತದ ತಪಾಸಣೆ:
ಚಾರಣಪಥ ಮತ್ತು ಅರಣ್ಯದೊಳಗಿನ ರಸ್ತೆಯಲ್ಲಿ ಸಂಚರಿಸುವಾಗ ಪ್ಲಾಸ್ಟಿಕ್ ನೀರಿನ ಬಾಟಲಿ, ಕ್ಯಾರಿಬ್ಯಾಗ್, ತಿಂಡಿ ಪೊಟ್ಟಣ ಇತ್ಯಾದಿ ನಿಷೇಧಿಸಲಾಗುವುದು. ಕಾಡಿನಲ್ಲಿ ಸಂಚರಿಸುವ ವಾಹನ ಸವಾರರಿಗೆ ಮತ್ತು ಚಾರಣಕ್ಕೆ ಬರುವವರಿಗೆ ಮೊದಲ ಹಂತದಲ್ಲಿ ನಿಷೇಧಿತ ವಸ್ತುವನ್ನು ಸ್ವಯಂ ಕಸದ ಬುಟ್ಟಿಗೆ ಹಾಕಲು ತಿಳಿಸಲಾಗುವುದು. 2ನೇ ಹಂತದಲ್ಲಿ ತಪಾಸಣೆ ನಡೆಸಲಾಗುವುದು. ತಪಾಸಣೆ ವೇಳೆ ಪ್ಲಾಸ್ಟಿಕ್ ಬಾಟಲಿ, ಕ್ಯಾರಿಬ್ಯಾಗ್, ಮದ್ಯದ ಬಾಟಲಿ, ಸಿಗರೇಟ್, ಬೆಂಕಿಪೊಟ್ಟಣ ಇತ್ಯಾದಿ ಕಂಡುಬಂದರೆ ದಂಡ ವಿಧಿಸಲಾಗುವುದು ಎಂದು ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

6 mins ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

1 hour ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

3 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

4 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

4 hours ago