ರಾಜ್ಯ

ತೋಟದ ಮನೆಯಲ್ಲಿ ಚನ್ನಪಟ್ಟಣ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಸಭೆ ನಡೆಸಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

ರಾಮನಗರ: ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು ಸೇರಿದಂತೆ ಚನ್ನಪಟ್ಟಣ ಕ್ಷೇತ್ರದ ಎಲ್ಲಾ ಪ್ರಮುಖ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಈಗಾಗಲೇ 5 ಜಿಲ್ಲಾ ಪಂಚಾಯಿತಿ, ಕ್ಷೇತ್ರ ಹಾಗೂ ಪಟ್ಟಣ ಭಾಗದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ ಹಳ್ಳಿ, ಹೋಬಳಿ, ಪಂಚಾಯಿತಿ ಮಟ್ಟದ ಮುಖಂಡರು ಬಂದಿದ್ದರು. ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು. ಅಭ್ಯರ್ಥಿ ಯಾರಾಗಬೇಕು ಎನ್ನುವುದರ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಕೆಲಸ ಮಾಡಬೇಕು ಎಂದು ಮುಖಂಡರಿಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.

ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಉಪಚುನಾವಣೆ ನಡೆಯಬಹುದು. ಇನ್ನು ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಬಹುದು. ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡುತ್ತೇವೆ ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಕಳೆದ ಎರಡು ಬಾರಿ ಜೆಡಿಎಸ್ ನಿಂದ ಗೆದ್ದಿದ್ದೇವೆ. ಈ ಹಿಂದಿನಿಂದಲೂ ಇದು ಜೆಡಿಎಸ್ ಭದ್ರಕೋಟೆ. ನಮ್ಮಲ್ಲಿನ ಸಂಘಟನೆಯಲ್ಲಿ ಕೆಲವೊಂದು ಲೋಪದೋಷಗಳಿಂದ ಹಿಂದೆ ಬಿದ್ದಿದ್ದೆವು. 2013ರಲ್ಲೂ ನಮಗೆ ಹೆಚ್ಚಿನ ಮತಗಳು ಬಂದಿದ್ದವು. ಚನ್ನಪಟ್ಟಣದಲ್ಲಿ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸಿದ್ದಾರೆ. ನಮ್ಮ ಸಂಘಟನೆ ದೃಷ್ಟಿಯಿಂದ ಕೂತು ಚರ್ಚೆ ಮಾಡಿದ್ದೇವೆ. ಯಾವುದೇ ಸಮಸ್ಯೆ ಆಗದ ರೀತಿ ಚುನಾವಣೆ ನಡೆಸುತ್ತೇವೆ ಎಂದು ಸಚಿವರು ಹೇಳಿದರು.

ಇನ್ನು ನಿಖಿಲ್ ಕುಮಾರಸ್ವಾಮಿ ಅವರು ಉಪಚುನಾವಣೆಯ ಅಭ್ಯರ್ಥಿ ಆಗಬೇಕು ಎಂಬ ಬಗ್ಗೆ ಕಾರ್ಯಕರ್ತರಿಂದ ಒತ್ತಡ ಇದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒತ್ತಡ ಒತ್ತಾಯ ಇರುವುದು ನಿಜ. ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಅಂತ 95% ನಾಯಕರು, ಮುಖಂಡರ ಅಭಿಪ್ರಾಯವಿದೆ. ಆದರೆ‌, ನಾವು ಈಗ ಇರುವ ಸನ್ನಿವೇಶ ನೋಡಿಕೊಂಡು ನಿರ್ಧಾರ ಕೈಗೊಳ್ಳಬೇಕು. ಏನೇನು ಬೆಳವಣಿಗೆಗಳು ಇವೆ ಅಂತ ನೋಡಬೇಕು. ನಿಖಿಲ್ ಮಂಡ್ಯದಲ್ಲಿ ‌ನಿಲ್ಲಿಸಿದಾಗ ಎಲ್ಲಾ ‌ಪಕ್ಷಗಳು ಒಂದಾಗಿ ಸೋಲಿಸಿದರು. ಸಂಘಟಿತ ಷಡ್ಯಂತ್ರ ಮಾಡಿ ಸೋಲಿಸಲಾಯಿತು. ನಾನು ಈಗ ಎನ್ ಡಿಎ ಭಾಗ. ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕು. ಯಾರೇ ನಿಂತು ಗೆದ್ದರೂ ಅದು ಎನ್ ಡಿಎ ಗೆಲುವು. ಆ ಮೂಲಕ ಕಾಂಗ್ರೆಸ್ ವಿರೋಧಿ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೋರಾಟಕ್ಕೆ ನಾವೂ ಕೈಜೋಡಿಸಿದ ಹಾಗಾಗುತ್ತದೆ ಎಂದು ಹೇಳಿದರು.

ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್ ಆಗುತ್ತದೆ. ಚುನಾವಣೆ ದಿನಾಂಕ ಇನ್ನು ನಾಲ್ಕೈದು ದಿನಗಳಲ್ಲಿ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಕೂಡಲೇ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ಜೊತೆ ಚರ್ಚೆ ಮಾಡಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

ಇನ್ನು ಚನ್ನಪಟ್ಟಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪದೇ ಪದೆ ಭೇಟಿ ನೀಡುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವರು ಎಷ್ಟು ಸಲ ಭೇಟಿ ಕೊಟ್ಟರೂ ಉಪಯೋಗ ಇಲ್ಲ. ಅವರು ಈ ಕ್ಷೇತ್ರಕ್ಕೆ ಕೊಟ್ಟ ಕಾಣಿಕೆ ಏನೆಂದು ಜನರಿಗೆ ಗೊತ್ತಿದೆ. ಚುನಾವಣೆ ಬಂದಿದೆ. ಅದಕ್ಕೆ ಪದೇ ಪದೆ ಬರುತ್ತಿದ್ದಾರೆ ಅಷ್ಟೇ. ಚುನಾವಣೆ ಮುಗಿದ ಮೇಲೆ ಈ ಕಡೆ ತಲೆ ಹಾಕುವುದಿಲ್ಲ ಅವರು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

2 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

2 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

2 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

3 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

3 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

3 hours ago