ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಮಳೆಯಾರ್ಭಟ ಜೋರಾಗಿರುವ ನಡುವೆಯೇ ಅರಬ್ಬೀ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ.
ಅರಬ್ಬಿ ಸಮುದ್ರ ತೀವ್ರ ಪ್ರಕ್ಷುಬ್ದಗೊಂಡಿದ್ದು, ಸಮುದ್ರದಲ್ಲಿ ಗಂಟೆಗೆ 30-40 ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಕಡಲ ತೀರದಲ್ಲಿ ಕಟ್ಟೆಚ್ಚರ ಘೋಷಣೆ ಮಾಡಿದ್ದು, ಸಮುದ್ರದ ಬಳಿ ಯಾರೂ ತೆರಳದಂತೆ ಸೂಚನೆ ನೀಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ರಕ್ಷಣೆಗೆ ಲೈಫ್ ಗಾರ್ಡ್, ಹೋಂ ಗಾರ್ಡ್ಗಳನ್ನು ನೇಮಕ ಮಾಡಲಾಗಿದೆ. ಕಡಲ ತೀರಕ್ಕೆ ಪ್ರವಾಸಿಗರು ತೆರಳದಂತೆ ನಿರ್ಬಂಧ ವಿಧಿಸಲಾಗಿದ್ದು, ಸಾರ್ವಜನಿಕರು, ಸ್ಥಳೀಯರು, ಪ್ರವಾಸಿಗರು ಯಾರೂ ಸಮುದ್ರ ತೀರಕ್ಕೆ ಹೋಗಬಾರದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.





