ರಾಜ್ಯ

ಮಸೀದಿ ಮುಂದೆ ಗಣೇಶೋತ್ಸವ ಮೆರವಣಿಗೆ ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ? ಆರ್‌. ಅಶೋಕ್‌ ಪ್ರಶ್ನೆ

ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರ, ಹಿಂದೂಗಳನ್ನು ಬಲಿಕೊಡಲೂ ಈ ಸರ್ಕಾರ ಸಿದ್ಧ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಹಿಂದೂಗಳ ವಿರುದ್ಧ ಎಫ್‌ಐಆರ್‌ ರದ್ದುಪಡಿಸದಿದ್ದರೆ ಉಗ್ರ ಹೋರಾಟ

ಬೆಂಗಳೂರು:  ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರವಿದೆ. ಈ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲೂ ಸಿದ್ಧವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಗಮಂಗಲದ ಕೋಮು ಗಲಭೆ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ನಿರ್ವಹಣೆ ಮಾಡುತ್ತಿರುವ ರೀತಿಯನ್ನು ಅವರು ಕಟು ಮಾತುಗಳಿಂದ ಟೀಕಿಸಿ ಸಾಮಾಜಿಕ ಜಾಲತಾಣ ʻಎಕ್ಸ್‌ʼ ನಲ್ಲಿ ಸರಣಿ ಟ್ವೀಟ್‌ ಮಾಡಿದ್ದಾರೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದುಷ್ಕೃತ್ಯ ನಡೆಸಲಾಗಿದೆ. ಇದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ಸರ್ಕಾರ ತಿಪ್ಪೆ ಸಾರಿಸುವ ಮಾತಾಡುತ್ತಿದೆ. ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ಸರ್ಕಾರ ನಿರ್ಧಾರ ಮಾಡಿದಂತಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಪ್ರಶ್ನೆಗಳಿಗೆ ಉತ್ತರಿಸಿ

ನೆಲಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ ಎಂದಿರುವ ಆರ್‌.ಅಶೋಕ, ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಆಗ್ರಹಿಸಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

1.) ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಿಲ್ಲವೇಕೆ?
2.) ಇಂತಹ ಕೃತ್ಯದ ಇತಿಹಾಸವಿದ್ದರೂ ಗುಪ್ತಚರ ವಿಭಾಗದವರು ಇದರ ಬಗ್ಗೆ ಮಾಹಿತಿ ಕೊಡಲಿಲ್ಲವೇಕೆ? ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ನಿರ್ಲಕ್ಷ್ಯ ಮಾಡಲಾಯಿತೇ?
3.)ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಮಾರ್ಗದುದ್ದಕ್ಕೂ ಭದ್ರತೆ ಯಾಕೆ ನೀಡಲಿಲ್ಲ?
4) ಪಟ್ಟಣದಲ್ಲಿದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?
5) ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40 ಕಿ.ಮೀ. ದೂರದಲ್ಲಿದ್ದ ಹೆಚ್ಚಿನ ಸಿಬ್ಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?
6) ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್‌ಐಆರ್ ನಲ್ಲಿ ಎ1 ಮಾಡಿರುವುದೇಕೆ?
7) ಎ1 ನಿಂದ ಎ23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್‌ಐಆರ್ ಮಾಡಿ ನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ? ಗಲಭೆಕೋರರನ್ನು ರಕ್ಷಿಸಲು ಸರ್ಕಾರ ಮುಂದಾಗಿರುವುದು ತುಷ್ಟೀಕರಣದ ಪರಮಾವಧಿ ಅಲ್ಲವೇ?
8) ಇಷ್ಟಕ್ಕೂ ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?
9) ಪೆಟ್ರೋಲ್ ಬಾಂಬ್, ಕಲ್ಲುಗಳ ರಾಶಿ, ತಲ್ವಾರ್ ಹಾಗೂ ಮಾರಕಾಸ್ತ್ರಗಳನ್ನು ಮಸೀದಿಯಲ್ಲಿ ಸಂಗ್ರಹಿಸಿ ದಾಂಧಲೆ ಆರಂಭಿಸಿದ್ದನ್ನು ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ಸ್ಪಷ್ಟ ಅಲ್ಲವೇ?
10) ಗಲಭೆಯಲ್ಲಿ ಅಪಾಯಕಾರಿ ವಸ್ತುಗಳ ಬಳಕೆಯಾದರೂ, 25 ಕೋಟಿ ರೂ. ಮೊತ್ತದ ಆಸ್ತಿ ನಷ್ಟವಾದರೂ, ಗೃಹ ಸಚಿವರಿಗೆ ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣವೇನು? ಅವರಿಗೆ ಆ ರೀತಿ ಮಾಹಿತಿ ನೀಡಿದವರು ಯಾರು? ಅಥವಾ ಈ ರೀತಿ ಹೇಳಲು ಅವರ ಮೇಲೆ ಯಾರದ್ದಾದರೂ ಒತ್ತಡವಿತ್ತೆ? ಅಥವಾ ಕಾಂಗ್ರೆಸ್ ಸರ್ಕಾರ ಯಾರನ್ನಾದರೂ ರಕ್ಷಿಸಲು ಹೊರಟಿದೆಯೇ?
11) ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿ.ಮೀ. ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಇನ್ನೂ ಭೇಟಿ ನೀಡಿಲ್ಲವೇಕೆ?

ತಪ್ಪು ಎಫ್‌ಐಆರ್‌, ಉಗ್ರ ಹೋರಾಟದ ಎಚ್ಚರಿಕೆ

ಈ ರೀತಿ ಹಿಂದೂಗಳ ವಿರುದ್ಧವೇ ತಪ್ಪು ಎಫ್ಐಆರ್ ದಾಖಲಿಸಲು ಕಾರಣರಾದ ಪೊಲೀಸರನ್ನು ಈ ಕೂಡಲೇ ಅಮಾನತು ಮಾಡಬೇಕು. ಎಫ್‌ಐಆರ್‌ ನಲ್ಲಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡುವ ಈ ಹುನ್ನಾರ ಕೈ ಬಿಡದಿದ್ದರೆ ನಾಗಮಂಗಲದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಆರ್‌.ಅಶೋಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ

ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟು, ಸರಕು-ಸರಂಜಾಮು ಸೇರಿದಂತೆ ಒಟ್ಟು ಸುಮಾರು 25 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನು ಪತ್ತೆ ಹಚ್ಚಿ, ಉತ್ತರ ಪ್ರದೇಶದ ಮಾದರಿಯಲ್ಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ. ಇಂತಹ ವಿಕೃತ ಮನಸ್ಥಿತಿಗೆ ಪೂರ್ಣವಿರಾಮ ಇಡಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಪೂರ್ವ ನಿಯೋಜಿತ ಕೋಮು ಗಲಭೆಯನ್ನು ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ನಿರ್ಲಕ್ಷ್ಯ ಮಾಡಿದರೆ ಜನ ಸಾಮಾನ್ಯರ ರಕ್ಷಣೆ ಮಾಡುವವರು ಯಾರು? ಜನಸಾಮಾನ್ಯರು ನೆಮ್ಮದಿಯಿಂದ ತಮ್ಮ ಉದ್ಯೋಗ, ವ್ಯಾಪಾರ ಮಾಡುವುದಾದರೂ ಹೇಗೆ? ಎಂದು ಆರ್‌.ಅಶೋಕ ಪ್ರಶ್ನಿಸಿದ್ದಾರೆ.

ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ನಮ್ಮ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಎಂಬುದೇ ಆಕಸ್ಮಿಕ, ಅಪರೂಪವಾಗುವ ದಿನ ಬಹಳ ದೂರವಿಲ್ಲ ಎಂದು ಅವರು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

8 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

8 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

9 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

9 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

9 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

9 hours ago