ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ರಕ್ಷಣೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಚಿಕ್ಕಮಗಳೂರು ತಾಲ್ಲೂಕಿನಾದ್ಯಂತ ಒಟ್ಟು 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಾಲ್ಲೂಕು ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಅರಣ್ಯ ಇಲಾಖೆ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗದಂತೆ ಜನಸಂಚಾರವನ್ನು ನಿಯಂತ್ರಿಸಲು ಈ ಕರ್ಫ್ಯೂ ವಿಧಿಸಲಾಗಿದೆ. ಸಂಜೆ 4 ಗಂಟೆಯಿಂದ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸಾರ್ವಜನಿಕರಿಗೆ ನಿರ್ಬಂಧಗಳು:
೧) ನಿಗದಿತ ಪ್ರದೇಶಗಳಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
೨) ಯಾವುದೇ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ
೩) ಪಟಾಕಿ ಅಥವಾ ಯಾವುದೇ ಸ್ಫೋಟಕ ವಸ್ತುಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ
೪) ಕಾನೂನು ಬಾಹಿರ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ.




