ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ.
ಕರ್ನಾಟಕ ಬಿಜೆಪಿ ಚಿತ್ರದುರ್ಗದಲ್ಲಿ ಯಡಿಯೂರಪ್ಪ ಉತ್ಸವ ಹೆಸರಿನಲ್ಲಿ ಬೃಹತ್ ಸಮಾವೇಶ ಮಾಡುವ ಮೂಲಕ ಅವರಿಗೆ ಅಭಿನಂದನೆ ಸಲ್ಲಿಸಲಿದೆ. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಈ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ.
82 ವರ್ಷದ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ ಅವರು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.
ಬಿ.ವೈ.ರಾಘವೇಂದ್ರ ಪೋಸ್ಟ್: ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂಸದ ರಾಘವೇಂದ್ರ ಅವರು ಭಾವುಕ ಪೋಸ್ಟ್ ಒಂದನ್ನು ಹಾಕಿದ್ದಾರೆ. ರೈತರು, ಬಡವರು ಹಾಗೂ ಸಮಾಜದ ಎಲ್ಲಾ ವರ್ಗಗಳ ಅಭಿವೃದ್ಧಿಗಾಗಿ ಅವರ ನಿರಂತರ ಸೇವೆ, ನಿಷ್ಠೆ ಮತ್ತು ದೂರದೃಷ್ಟಿಯ ನಾಯಕತ್ವ ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ. ಬಿಜೆಪಿ ಪಕ್ಷವು ಅವರ ನಾಐಕತ್ವದ ಮೇಲೆ ಅಪಾರ ಹೆಮ್ಮೆ ಹೊಂದಿದ್ದು, ಅವರು ಇನ್ನೂ ದೀರ್ಘಕಾಲ ಆರೋಗ್ಯ ಮತ್ತು ಶಕ್ತಿಯೊಂದಿಗೆ ದೇಶ ಮತ್ತು ರಾಜ್ಯಕ್ಕೆ ಮಾರ್ಗದರ್ಶನ ನೀಡಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.





