ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದು ಕಳೆದ ಎರಡು ದಿನಗಳಿಂದ ವರಿಷ್ಠರ ಭೇಟಿಗೆ ತೆರಳಿದ್ದ ಭಿನ್ನಮತೀಯರು ಬಂದ ದಾರಿಗೆ ಸುಂಕ ಇಲ್ಲ ಎನ್ನುವಂತೆ ಇಂದು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ.
ಬಿಜೆಪಿ ಖಾಯಂ ಭಿನ್ನಮತೀಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಬಿ.ಪಿ.ಹರೀಶ್, ಜಿ.ಎಂ.ಸಿದ್ದೇಶ್ವರ, ಎನ್.ಆರ್.ಸಂತೋಷ್ ಸೇರಿದಂತೆ ಮತ್ತಿತರರು ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗಿದ್ದಾರೆ.
ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡುವ ವಿಫಲ ಪ್ರಯತ್ನ ನಡೆಸಿದ್ದಾರೆ. ಇಂದು ಬೆಳಿಗ್ಗೆ ಕರ್ನಾಟಕ ಭವನದಲ್ಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಉಳಿದಂತೆ ಯಾವುದೇ ರಾಷ್ಟ್ರೀಯ ಬಿಜೆಪಿ ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಇನ್ನೆರಡು ದಿನದ ನಂತರ ಪುನಃ ದೆಹಲಿಗೆ ಬರುವುದಾಗಿ ಹೇಳಿದ್ದರಾದರೂ ಅದು ಈ ವರೆಗೂ ಖಚಿತವಾಗಿಲ್ಲ.