ರಾಜ್ಯ

ಬಸವಣ್ಣನವರ ಬಗ್ಗೆ ಯತ್ನಾಳ್‌ ವಿವಾದಾತ್ಮಕ ಹೇಳಿಕೆ: ಪ್ರಿಯಾಂಕ್‌ ಖರ್ಗೆ ಕಿಡಿ

ಬೆಂಗಳೂರು: ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಬಸನಗೌಡ ಪಾಟೀಲ ಯತ್ನಾಳ್‌ ಅವರು ವಕ್ಫ್‌ ಮಂಡಳಿ ವಿರುದ್ಧದ ಪ್ರತಿಭಟನೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ನಾವು ಹೋರಾಟ ಮಾಡಲು ಹೆದರಿದರೆ ಬಸವಣ್ಣನವರ ಹಾಗೇ ನದಿಗೆ ಹಾರಿ ಸಾಯಬೇಕಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಕುರಿತು ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿ, ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ. ಅಲ್ಲದೇ ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು ಈಗ ಸಮಾಜ ಸುಧಾರಣೆಗೆ ಜೀವ ಸವೆಸಿದ ಮಹನೀಯರ ಬುಡಕ್ಕೂ ಚಾಚುವಷ್ಟು ಉದ್ದವಾಗಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಸವಣ್ಣನವರ ಹಾಗೆ ಹೊಳೆ ಹಾರಬೇಕು ಎನ್ನುವ ಮೂಲಕ ಬಸವಣ್ಣನವರನ್ನು ಪಲಾಯನವಾದಿ ಎಂಬರ್ಥದಲ್ಲಿ ಮಾತನಾಡಿದ ಯತ್ನಾಳ್ ಅವರನ್ನು ಈ ನಾಡಿನ ಪ್ರಜ್ಞಾವಂತ ಬಸವಾನುಯಾಯಿಗಳು ಗಟ್ಟಿ ಧ್ವನಿಯಲ್ಲಿ ಖಂಡಿಸಬೇಕಿದೆ. ತನ್ನ ಬಣ್ಣಿಸಬೇಡ, ಇದಿರು ಹಳಿಯಬೇಡ ಎಂದಿದ್ದ ಬಸವಣ್ಣನವರ ಹೆಸರನ್ನು ಯತ್ನಾಳ್ ಅವರು ತಮ್ಮ ದ್ವೇಷ ಭಾಷಣಕ್ಕೆ ಬಳಸಿದ್ದು ಮತ್ತೊಂದು ಘೋರ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತ್ನಾಳ್ ಅವರೇ, ಬಸವಣ್ಣನವರು ಹೊಳೆಗೆ ಹಾರಿಲ್ಲ, ಈ ಸಮಾಜಕ್ಕೆ ಜ್ಞಾನದ ಹೊಳೆ ಹರಿಸಿದ್ದಾರೆ.
ನಿಮ್ಮ ಪ್ರಕಾರ ಬಸವಣ್ಣನವರು ಹೊಳೆಗೆ ಹಾರಿದ್ದಾರೆ ಎನ್ನುವುದಾದರೆ ಅವರನ್ನು ಹೊಳೆಗೆ ಹಾರುವಂತೆ ಮಾಡಿದವರು ಯಾರು? ಇಂದು ಯತ್ನಾಳ್ ಅವರು ಪ್ರತಿಪಾದಿಸುತ್ತಿರುವ ಸಿದ್ಧಾಂತವೇ ಅಂದು ಬಸವಾದಿ ಶರಣರನ್ನು ಹಿಂಸಿಸಿದ್ದಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕಲ್ಯಾಣದ ಶರಣರ ಹತ್ಯೆ ನಡೆಸಿದವರು ಯಾರು? ಶರಣರು “ಮರಣವೇ ಮಹಾನವಮಿ“ ಎಂದಿದ್ದೇಕೆ? ವಚನ ಬಂಡಾರಕ್ಕೆ ಬೆಂಕಿ ಇಟ್ಟವರು ಯಾರು? ಅನುಭವ ಮಂಟಪಕ್ಕೆ ದಾಳಿ ಮಾಡಿದವರು ಯಾರು? ಮಡಿವಾಳ ಮಾಚಿದೇವರು ಕತ್ತಿ ಹಿಡಿದಿದ್ದೇಕೆ? ಯಾರಿಂದ ರಕ್ಷಣೆ ಪಡೆಯಲು? ಈ ವಿಚಾರಗಳ ಬಗ್ಗೆ ಚರ್ಚಿಸುವ ಶಕ್ತಿ ಬಿಜೆಪಿಯವರಿಗೆ ಇದೆಯೇ? ಎಂದು ಸವಾಲು ಎಸೆದಿದ್ದಾರೆ.

ಬಸವಣ್ಣನವರ ಅನುಭವ ಮಂಟಪದ ಪರಿಕಲ್ಪನೆಯಲ್ಲೇ ಇಂದು ನಾವು ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದ್ದೇವೆ. ಅವರ ತತ್ವಗಳ ಪ್ರೇರಣೆಯಲ್ಲೇ ನಮ್ಮ ಸಂವಿಧಾನವಿದೆ. ಧಮನಿತರಿಗೆ ಆತ್ಮಶಕ್ತಿ ನೀಡಿದ, ಶೋಷಿತರಿಗೆ ಘನತೆಯ ಬದುಕು ತಂದುಕೊಟ್ಟ, ಕಲ್ಯಾಣ ಕ್ರಾಂತಿಯ ಮೂಲಕ ಮೌಢ್ಯದಲ್ಲಿ ಜಡಗಟ್ಟಿದ್ದ ಸಮಾಜಕ್ಕೆ ಹೊಸ ಮಾರ್ಗ ತೋರಿದ ಬಸವಣ್ಣನವರು ಕೇವಲ “ಹೊಳೆ ಹಾರಿದವರಾಗಿ” ಕಂಡಿದ್ದು ಬಿಜೆಪಿಗರ ಅಜ್ಞಾನದ ದ್ಯೋತಕವಾಗಿದೆ. ಬಸವಣ್ಣರನ್ನು ಅನುಸರಿಸುವ ಈ ನಾಡಿನ ಜನ ಬಿಜೆಪಿಗರ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

34 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago