Mysore
17
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ನಾಲೆಗೆ ನೀರು ಹರಿಸಲು ಕ್ರಮ : ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ಶ್ರೀರಂಗಪಟ್ಟಣ: ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲಾ ವಿತರಣಾ ನಾಲೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೆಂಪೂಗೌಡ ಅವರ ನೇತೃತ್ವದಲ್ಲಿ ಕಾರ್ಯಕರ್ತರೊಂದಿಗೆ ಈ ಕುರಿತು ಚರ್ಚಿಸಿ, ಬಳಿಕ ಅವರು ಮಾತನಾಡಿದರು.

ಪ್ರಸ್ತುತ ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಲ್ಲಿ ನೀರು ಹರಿಸಿದ್ದರೂ ಇನ್ನು ಕೂಡ ಸಾಕಷ್ಟು ಪ್ರದೇಶದ ಕಡೆಯ ಭಾಗಕ್ಕೆ ಸರಿಯಾಗಿ ನೀರು ತಲುಪದಿರುವುದು ಹಾಗೂ ಬೇಸಿಗೆ ಹಿನ್ನೆಲೆಯಲ್ಲಿ ನೀರಿನ ಲಭ್ಯತೆ ಸಾಲದೆ, ಕೃಷಿ ಜಮೀನಿನಲ್ಲಿ ಒಣಗುತ್ತಿರುವ ವಿವಿಧ ಕೃಷಿ ಬೆಳೆಗಳನ್ನು ಉಳಿಸಿಕೊಳ್ಳಲು ರೈತರಿಂದ ಸಾಕಷ್ಟು ಒತ್ತಾಯ ಕೇಳಿಬಂದ ಕಾರಣ ಸರ್ಕಾರಕ್ಕೆ ಮನವರಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಕಾವೇರಿ ನೀರಾವರಿ ನಿಗಮ ಮತ್ತೊಂದು ಕಟ್ಟು ನೀರನ್ನು ತಕ್ಷಣ ಹರಿಸಲು ಸಮ್ಮತಿ ಸೂಚಿಸಿದ್ದು, ಶನಿವಾರ ರಾತ್ರಿ ೮ ಗಂಟೆಯಿಂದಲೇ ವಿಶ್ವೇಶ್ವರಯ್ಯ ನಾಲೆ ಸೇರಿದಂತೆ ಎಲ್ಲಾ ವಿತರಣಾ ನಾಲೆಗಳಿಗೂ ನೀರು ಹರಿಸಲು ಅಗತ್ಯ ಕ್ರಮ ಕೈಗೊಂಡಿದೆ ಎಂದರು.

ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಮಾತನಾಡಿ, ಪ್ರಮುಖವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಕೆಆರ್‌ಎಸ್ ಜಲಾಶಯದಲ್ಲಿ ನೂರಾರು ಕೋಟಿ ರೂ. ವೆಚ್ಚದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ ಹಾಗೂ ಕಾವೇರಿ ಆರತಿಗೆ ಚಾಲನೆ ನೀಡಲು ಚಿಂತನೆ ನಡೆಸಿರುವ ಕ್ರಮಕ್ಕೆ ರಾಜ್ಯ ರೈತ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈಗ ಅಂದಾಜಿಸಲಾಗಿರುವ ಅದೇ ವೆಚ್ಚದಲ್ಲಿ ಕಾವೇರಿ ಕಣಿವೆಯ ಕಡೆ ಭಾಗಕ್ಕೆ ನೀರನ್ನು ಸಮರ್ಪಕವಾಗಿ ತಲುಪಿಸಲು ಎಲ್ಲಾ ಉಪನಾಲೆಗಳು ಹಾಗೂ ವಿತರಣಾ ನಾಲೆಗಳನ್ನೂ ದುರಸ್ತಿಪಡಿಸಿ ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲ ರೈತರಿಗೂ ನೆರವಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಜನಪ್ರತಿನಿಽಗಳು ಕೂಡ ರೈತರ ಪರ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾರ್ಯದರ್ಶಿ ನಿಂಗಪ್ಪಾಜಿ, ಶ್ರೀರಂಗಪಟ್ಟಣ ತಾಲ್ಲೂಕು ಅಧ್ಯಕ್ಷ ನೆಲಮನೆ ಶಂಭುಗೌಡ, ಉಪಾಧ್ಯಕ್ಷ ಕಡತನಾಳು ಬಾಲಕೃಷ್ಣ, ತಾಲ್ಲೂಕು ಕಾರ್ಯದರ್ಶಿ ಪಾಂಡು, ತಡಗವಾಡಿ ದೇವೇಗೌಡ, ಮಾಜಿ ಅಧ್ಯಕ್ಷ ಮರಳಾಗಾಲ ಕೃಷ್ಣೇಗೌಡ, ಪಾಂಡವಪುರ ತಾಲ್ಲೂಕು ಅಧ್ಯಕ್ಷ ವಿಜಯಕುಮಾರ್, ಮಾಜಿ ಅಧ್ಯಕ್ಷ ಕೆನ್ನಾಳು ನಾಗರಾಜು, ಮುಖಂಡರಾದ ಎಣ್ಣೆಹೊಳೆಕೊಪ್ಪಲು ರಘು, ಮಂಜು ಉಪಸ್ಥಿತರಿದ್ದರು.

Tags:
error: Content is protected !!