Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ರಾಮನ ಪೂಜೆಗೆ ಅವಕಾಶ ನೀಡದೆ ಸಂಸದ ಪ್ರತಾಪ ಸಿಂಹಗೆ ದಲಿತರಿಂದ ಘೇರಾವ್‌!

ಮೈಸೂರು : ಅಯೋಧ್ಯೆಯಲ್ಲಿ ವಿರಾಜಮಾನರಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಶ್ರೀ ರಾಮನ ಪೂಜೆಗೆ  ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ ವೇಳೆ  ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಹಾಕಿ, ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ ಘಟನೆ ಮೈಸೂರು ತಾಲೂಕು ಹಾರೋಹಳ್ಳಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ರಾಮಲಲ್ಲಾ ಮೂರ್ತಿಯ ಕೃಷ್ಣ ಶಿಲೆ ಕಲ್ಲು ಹಾರೋಹಳ್ಳಿ ಬಳಿಯ ಗಯಜ್ಜೇಗೌಡನಪುರದ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕಿತ್ತು. ಈ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ ಭೂಮಿಪೂಜೆ ಮತ್ತು ರಾಮನ ಪೂಜೆ ಏರ್ಪಡಿಸಲಾಗಿತ್ತು.

ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಇಂದು ಬೆಳಗ್ಗೆ ಆಗಮಿಸುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತ ಮುಖಂಡರು ಜಮೀನಿನ ಬಳಿಯೇ ತಡೆದು ಘೇರಾವ್ ಮಾಡಿ “ಗೋ ಬ್ಯಾಕ್ ಪ್ರತಾಪ್ ಸಿಂಹ’, ‘ದಲಿತ ವಿರೋಧಿ ಪ್ರತಾಪ್ ಸಿಂಹನಿಗೆ ಧಿಕ್ಕಾರ’.. ಇತ್ಯಾದಿ ಘೋಷಣೆಗಳನ್ನು ಕೂಗಿದರು.

ಮಾಜಿ ತಾಪಂ ಸದಸ್ಯ ಹಾರೋಹಳ್ಳಿ ಸುರೇಶ್ ಮಾತನಾಡಿ, ”ನೀವೊಬ್ಬ ದಲಿತ ವಿರೋಧಿ. ನಿಮ್ಮ ನಡವಳಿಕೆಯಿಂದ ದಲಿತರ ಭಾವನೆಗೆ ಧಕ್ಕೆಯುಂಟಾಗಿದೆ. ಮಹಿಷ ದಸರಾ ಆಚರಣೆ ಸಂದರ್ಭದಲ್ಲಿ ದಲಿತರನ್ನು ತುಳಿದು ಹಾಕಿ ಬಿಡುತ್ತೇನೆ, ಹೊಸಕಿ ಹಾಕಿ ಬಿಡುತ್ತೇನೆ ಎಂದು ಬೆದರಿಸಿದ್ದ ನೀವು ದಲಿತರ ಜಮೀನಿಗೆ ಏಕೆ ಬರುತ್ತೀರಿ? ಇಲ್ಲಿಂದ ಹೊರ ನಡೆಯಿರಿ” ಎಂದು ಹೇಳಿದರು.

ಈ ವೇಳೆ ಸಂಸದ ಪ್ರತಾಪ್ ಸಿಂಹ, “ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ದಲಿತ ವಿರೋಧಿಯಲ್ಲ” ಎಂದು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದರು, ಸಮಾಧಾನಗೊಳ್ಳದ ಗ್ರಾಮಸ್ಥರು, “ನೀವು ಏನು ಹೇಳುವುದು ಬೇಡ, ಇಲ್ಲಿಂದ ವಾಪಸ್ ಹೋಗಿ” ಪಟ್ಟು ಹಿಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!