ಬೆಂಗಳೂರು: ದೇಶದ ರೈತರ ಬಗ್ಗೆ ನಿರ್ಲಕ್ಷ್ಯ ಭಾವನೆ ತೋರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್ 26 ರಂದು ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ಧಲೆವಾಲಾ ನೇತೃತ್ವದಲ್ಲಿ ನಡೆಯುವ ರೈತರ ಹೋರಾಟ ಬೆಂಬಲಿಸಿ ಮೌನ ಧರಣಿ ಮಾಡಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ದಕ್ಷಿಣ ಭಾರತ ಸಂಚಾಲಕ ಕುರಬೂರು ಶಾಂತಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಇಂದು (ನ.20) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ರೈತರ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತ ಸಂಘಟನೆಗಳು ನವೆಂಬರ್ 26 ರಂದು ಮೌನ ಧರಣಿ ನಡೆಸಲಾಗುತ್ತಿದೆ. ಅಲ್ಲದೇ ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಸಂಜೀವ್ ಖನ್ನಾ ಅವರಿಗೂ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ದೆಹಲಿಯಲ್ಲಿ ಮೌನ ಧರಣಿ ನಡೆಸುವ ವೇಳೆ ದೆಹಲಿ ರೈತ ಮುಖಂಡರ ಪ್ರಾಣಕ್ಕೆ ಅಪಾಯ ಆದರೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ಅಲ್ಲದೇ ಕೇಂದ್ರ ಇದರಿಂದ ಎಚ್ಚೆತ್ತುಕೊಳ್ಳದೆ ಹೋದರೆ ರಾಜ್ಯದಲ್ಲಿಯೂ ದೆಹಲಿ ಹೋರಾಟ ಬೆಂಬಲಿಸಿ ಸಹಸ್ರಾರು ಸಂಖ್ಯೆಯ ರೈತರ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ ಹಾಗೂ ಗುಲ್ಬರ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಕಬ್ಬಿಗೆ ಎಫ್ಆರ್ಪಿ ಮೇಲೆ ಹೆಚ್ಚುವರಿ ದರ ನಿಗಧಿ ಮಾಡಬೇಕೆಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಅಧಿವೇಶನ ಶುರುವಾಗುವ ಮುನ್ನವೇ ಸಿಎಂ ಸಿದ್ದರಾಮಯ್ಯ ಅವರು ರೈತ ಮುಖಂಡರ ಸಭೆ ಕರೆದು ರಾಜ್ಯಾದ್ಯಾಂತ ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.





