ಕೊಲ್ಲೂರು: ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ರಾಜ್ಯದ ಜನತೆಗೆ ಅನ್ಯಾಯ ಮಾಡುವುದಿಲ್ಲ. ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಫಲಾನುಭವಿಗಳ ಪಟ್ಟಿ ನೀಡಲು ಹೇಳಿದ್ದೇವೆ. ಎಲ್ಲರಿಂದ ಮರು ಅರ್ಜಿ ಪಡೆಯುತ್ತೇವೆ ಎಂದರು.
ನಾನು ದೇವರ ಸನ್ನಿಧಿಯಲ್ಲಿ ನಿಂತು ಹೇಳುತ್ತಿದ್ದೇನೆ. ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಐದು ಗ್ಯಾರಂಟಿ ಜಾರಿ ನೋಡಿಕೊಳ್ಳಲು ತಾಲ್ಲೂಕು ಸಮಿತಿಗಳಿವೆ. ರಾಜ್ಯಮಟ್ಟದ ಸಮಿತಿ ಕೂಡ ಇದೆ. ಸಮಿತಿ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಿ ಅದು ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತದೆ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಧೈರ್ಯ ಹೇಳಿದರು.





